ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹14 ಲಕ್ಷ ಪಾವತಿಸಿ: ಹೈಕೋರ್ಟ್‌ | 85 ವರ್ಷದ ಹಿರಿಯ ಜೀವದ ಕಾನೂನು ಹೋರಾಟಕ್ಕೆ ಜಯ

ತಾಯಿಯ ಜೀವನಾಂಶಕ್ಕೆ ಮಗ–ಮೊಮ್ಮಗಳ ತಕರಾರು
Published : 3 ಅಕ್ಟೋಬರ್ 2024, 0:30 IST
Last Updated : 3 ಅಕ್ಟೋಬರ್ 2024, 0:30 IST
ಫಾಲೋ ಮಾಡಿ
Comments

ಬೆಂಗಳೂರು: ‘ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ 85 ವರ್ಷದ ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕ ತಲಾ ₹7 ಲಕ್ಷದಂತೆ ₹14 ಲಕ್ಷ ಪಾವತಿಸಿ’ ಎಂದು ಅಪ್ಪರಂಡ ಶಾಂತಿ ಬೋಪಣ್ಣ ಅವರ ಮಗ ಮತ್ತು ಮೊಮ್ಮಗಳಿಗೆ ನಿರ್ದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಎತ್ತಿಹಿಡಿದಿದೆ.

‘ಏಕಸದಸ್ಯ ನ್ಯಾಯಪೀಠದ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಅಪ್ಪರಂಡ ಶಾಂತಿ ಬೋಪಣ್ಣ ಅವರ ಮಗ ಎ.ಬಿ.ಗಣಪತಿ ಸಲ್ಲಿಸಿದ್ದ ರಿಟ್‌ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು, ‘ಈ ಪ್ರಕರಣದ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶ ಸಂಪೂರ್ಣವಾಗಿ ಸರಿ ಇದೆ’ ಎಂಬ ಮುದ್ರೆ ಒತ್ತಿದೆ.

‘ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನಾಂಶಕ್ಕೆ ಸಂಬಂಧಿಸಿದಂತೆ ಅವರ ಮಗ ಮತ್ತು ಮೊಮ್ಮಗಳು ವರ್ಷವೊಂದಕ್ಕೆ ತಲಾ ₹7 ಲಕ್ಷ ಪಾವತಿಸಬೇಕು ಎಂಬ ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ನಾವು ಮಧ್ಯ ಪ್ರವೇಶಿಸುವ ಅವಶ್ಯಕತೆ ಇಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಮೇಲ್ಮನವಿದಾರ ಗಣಪತಿ ಪರ ಹೈಕೋರ್ಟ್‌ ವಕೀಲರಾದ ಎಚ್‌.ಎನ್‌.ಮಂಜುನಾಥ್‌ ಹಾಗೂ ಅಪ್ಪರಂಡ ಶಾಂತಿ ಬೋಪಣ್ಣ ಪರ ರೂಪಾ ರೋಣ ಅವರು ವಾದ ಮಂಡಿಸಿದ್ದರು.

ಪ್ರಕರಣವೇನು?: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಹೆರೂರು ಎಸ್ಟೇಟ್‌ ನಿವಾಸಿಯಾದ ಅಪ್ಪರಂಡ ಶಾಂತಿ ಬೋಪಣ್ಣ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್‌ ಅನ್ನು ತಮ್ಮ ಮಗ ಎ.ಬಿ.ಗಣಪತಿ (57) ಹಾಗೂ ಮೊಮ್ಮಗಳಾದ ಪೂಜಾ ಅಲಿಯಾಸ್ ಸಂಜನಾ ಸುಬ್ಬಯ್ಯ (35) ಅವರಿಗೆ 2016ರಲ್ಲಿ ‘ದಾನಪತ್ರ’ದ ಮೂಲಕ ಅಂದರೆ ‘ಗಿಫ್ಟ್‌ ಡೀಡ್‌’ ರೂಪದಲ್ಲಿ ನೀಡಿದ್ದರು. 

ಈ ವೇಳೆ ಅಪ್ಪರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕ ತಲಾ ₹7 ಲಕ್ಷ ಮೊತ್ತವನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸುವುದಾಗಿ ಗಣಪತಿ ಹಾಗೂ ಸಂಜನಾ ಭರವಸೆ ನೀಡಿದ್ದರು. 2016ರಿಂದ 2019ರವರೆಗೆ ಹಣ ಪಾವತಿಸಿದ್ದರು. ನಂತರ ನೀಡಿರಲಿಲ್ಲ.

ಏತನ್ಮಧ್ಯೆ, ಗಣಪತಿ ಹಾಗೂ ಸಂಜನಾ ಆಸ್ತಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಸಂಗತಿ ಅಪ್ಪರಂಡ ಶಾಂತಿ ಬೋಪಣ್ಣ ಅವರ ಅರಿವಿಗೆ ಬಂದಿತ್ತು. ಹೀಗಾಗಿ, ‘ದಾನಪತ್ರ ರದ್ದುಪಡಿಸಬೇಕು’ ಎಂದು ಕೋರಿ ಅವರು, ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಮಂಡಳಿ’ಯ ಪ್ರತಿನಿಧಿಯೂ ಆದ ಕೊಡಗು ಜಿಲ್ಲೆ ಮಡಿಕೇರಿಯ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ಉ‍ಪವಿಭಾಗಾಧಿಕಾರಿ 2021ರ ಸೆಪ್ಟೆಂಬರ್ 15ರಂದು ದಾನಪತ್ರ ರದ್ದುಗೊಳಿಸಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಗಣಪತಿ ಹಾಗೂ ಸಂಜನಾ, ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಿದ್ದರು. 2023ರ ಮಾರ್ಚ್‌ 23ರಂದು ಉಪವಿಭಾಗಾಧಿಕಾರಿ ಆದೇಶವನ್ನು ರದ್ದುಪಡಿಸಿದ್ದ ಜಿಲ್ಲಾಧಿಕಾರಿ, ಮಗ ಹಾಗೂ ಮೊಮ್ಮಗಳ ಆಸ್ತಿ ಹಕ್ಕನ್ನು ಮರು ಸ್ಥಾಪಿಸಿದ್ದರಲ್ಲದೆ, ‘ನಿಮ್ಮ ವೃದ್ಧ ತಾಯಿಯ ಜೀವಿತಾವಧಿವರೆಗೆ ವಾರ್ಷಿಕ ಜೀವನಾಂಶ ಪಾವತಿಸಿ’ ಎಂದು ಮಗ ಮತ್ತು ಮೊಮ್ಮಗಳಿಗೆ ನಿರ್ದೇಶಿಸಿದ್ದರು. 

ಈ ಆದೇಶವನ್ನು ಪ್ರಶ್ನಿಸಿ ಅಪ್ಪರಂಡ ಶಾಂತಿ ಬೋಪಣ್ಣ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ರಿಟ್‌ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 2023ರ ಡಿಸೆಂಬರ್ 20ರಂದು ಅಂತಿಮ ಆದೇಶ ಹೊರಡಿಸಿ ‘ತಲಾ ₹7 ಲಕ್ಷ ಪಾವತಿಸಿ’ ಎಂದು ಮಗ ಮೊಮ್ಮಗಳಿಗೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಗ ಗಣಪತಿ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ದಾನಪತ್ರ ಎಂದರೇನು?

‘ದಾನಪತ್ರ’ವು ಆಸ್ತಿ ಮಾಲೀಕರು ತಮ್ಮ ಆಸ್ತಿ ಮಾಲೀಕತ್ವವನ್ನು ಇನ್ನೊಬ್ಬ ವ್ಯಕ್ತಿಗೆ ಉಡುಗೊರೆಯಾಗಿ ವರ್ಗಾಯಿಸಲು ಕಾನೂನುಬದ್ಧವಾಗಿ ಅನುಮತಿಸುವ ದಾಖಲೆಯಾಗಿದೆ. ಇದು 'ದಾನಿ' ಮೂಲಕ ಆಸ್ತಿ ಹಕ್ಕುಗಳನ್ನು ವರ್ಗಾಯಿಸುವ ಸ್ವಯಂಪ್ರೇರಿತ ಕ್ರಿಯೆಯಾಗಿದೆ.  ಸಾಮಾನ್ಯವಾಗಿ ರಿಯಲ್ ಎಸ್ಟೇಟ್ ನಗದು ಅಥವಾ ಇತರ ಬೆಲೆಬಾಳುವ ಆಸ್ತಿಗಳನ್ನು ಉಡುಗೊರೆ ರೂಪದಲ್ಲಿ ದಾನಪತ್ರದ ಮೂಲಕ ನೀಡಲಾಗುತ್ತದೆ. ಇದು ಇತರ ಆಸ್ತಿ ವರ್ಗಾವಣೆಗಳಿಗಿಂತಲೂ ಭಿನ್ನವಾಗಿರುತ್ತದೆ. ಏಕೆಂದರೆ ಮಾಲೀಕತ್ವದ ವರ್ಗಾವಣೆಯನ್ನು ಹಣದ ವಿನಿಮಯ ಇಲ್ಲದೆ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT