ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪರವಾನಗಿ ನವೀಕರಿಸದ ಆರೋಪ | ಪವರ್ ಟಿ.ವಿ.ಮೇಲ್ಮನವಿ: ನಾಳೆ ತೀರ್ಪು

Published : 2 ಜುಲೈ 2024, 16:07 IST
Last Updated : 2 ಜುಲೈ 2024, 16:07 IST
ಫಾಲೋ ಮಾಡಿ
Comments

ಬೆಂಗಳೂರು: ‘ಪರವಾನಗಿ ನವೀಕರಿಸದ ಆರೋಪದಡಿ ಪವರ್‌ ಟಿ.ವಿ. ಕನ್ನಡ ಚಾನಲ್‌ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕು’ ಎಂದು ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದೆ.

ಈ ಸಂಬಂಧ ‘ಮೆಸರ್ಸ್‌ ಪವರ್‌ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕ ಬೆಂಗಳೂರಿನ ದಬ್ಬೇಗಟ್ಟ ಮಧು ಲಕ್ಷ್ಮಣ, ‘ಮೆಸರ್ಸ್‌ ಮಿಟ್‌ಕಾನ್‌ ಇನ್‌ಫ್ರಾ ಪ್ರಾಜೆಕ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕ ಮುಂಬೈನ ಶ್ರೀಕಾಂತ್‌ ಮಿಥೇಶ್‌ ಬಾಂಗ್ಡಿಯಾ ಮತ್ತು ‘ಪವರ್‌ ಸ್ಮಾರ್ಟ್‌ ಮೀಡಿಯಾ‘ದ ಬೆಂಗಳೂರಿನ ಹೆಚ್ಚುವರಿ ನಿರ್ದೇಶಕ ರಾಕೇಶ್‌ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್‌ ಶೆಟ್ಟಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮೇಲ್ಮನವಿದಾರ ಕಂಪನಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಎಸ್‌.ಎಸ್‌.ನಾಗಾನಂದ, ‘ಸಚಿವಾಲಯ ಹೊರಡಿಸಿರುವ ಷೋಕಾಸ್‌ ನೋಟಿಸ್‌ ಆಧರಿಸಿ ಚಾನಲ್‌ ಸ್ಥಗಿತಗೊಳಿಸಲು ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶ ಸೂಕ್ತವಾಗಿಲ್ಲ. ಅರ್ಜಿದಾರರು ಷೋಕಾಸ್‌ ನೋಟಿಸ್‌ಗೆ ಈಗಾಗಲೇ ವಿವರವಾದ ಉತ್ತರವನ್ನು ನೀಡಿದ್ದಾರೆ. ಆದರೂ, ಏಕಸದಸ್ಯ ನ್ಯಾಯಪೀಠವು ಚಾನಲ್‌ ಸ್ಥಗಿತಗೊಳಿಸಲು ನೀಡಿರುವ ಆದೇಶದಿಂದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಂಡಂತಾಗಿದೆ’ ಎಂದು ಪ್ರತಿಪಾದಿಸಿದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅರವಿಂದ ಕಾಮತ್‌ ಅವರು, ‘ಮೆಸರ್ಸ್‌ ಮಿಟ್‌ಕಾನ್‌ ಇನ್‌ಫ್ರಾ ಪ್ರಾಜೆಕ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಪರವಾನಗಿಯನ್ನು 2021ರ ಅಕ್ಟೋಬರ್ 12ರಿಂದಲೇ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ. ಆದರೂ, ಕಾನೂನು ಬಾಹಿರವಾಗಿ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿದೆ. ಹೀಗಾಗಿ, ಏಕಸದಸ್ಯ ನ್ಯಾಯಪೀಠದ ಆದೇಶ ಸೂಕ್ತವಾಗಿಯೇ ಇದೆ’ ಎಂದು ಸಮರ್ಥಿಸಿಕೊಂಡರು. ವಾದ–‍ಪ್ರತಿವಾದ ಆಲಿಸಿದ ನ್ಯಾಯಪೀಠ ಇದೇ 3ಕ್ಕೆ (ಬುಧವಾರ) ತೀರ್ಪು ಪ್ರಕಟಿಸುವುದಾಗಿ ತಿಳಿಸಿತು.

ಪ್ರಕರಣವೇನು?: ‘ನಮ್ಮ ವಿರುದ್ಧ ಪವರ್‌ ಟಿ.ವಿ ಚಾನಲ್‌ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ’ ಎಂದು ಆರೋಪಿಸಿ ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್‌ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್‌.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತ್ತು.

‘ಪವರ್‌ ಟಿ.ವಿ.ಚಾನಲ್‌, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯ್ದೆ–1995ರ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ಸುದ್ದಿಗಳೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರವರೆಗೆ ಪ್ರಸಾರ ಮಾಡಬಾರದು’ ಎಂದು ಕಳೆದ ತಿಂಗಳ 25ರಂದು ಆದೇಶಿಸಿತ್ತು. ಏಕಸದಸ್ಯ ನ್ಯಾಯಪೀಠದ ವಿಚಾರಣೆಯಲ್ಲಿ ಅರ್ಜಿದಾರರ ಪರ ಹೈಕೋರ್ಟ್‌ನ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ, ಸಂದೇಶ್‌ ಜೆ.ಚೌಟ ಹಾಗೂ ಡಿ.ಆರ್.ರವಿಶಂಕರ್‌ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT