ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು, ಆದೇಶ ಕಾಯ್ದಿರಿಸಿದ ಕೋರ್ಟ್

Published : 9 ಆಗಸ್ಟ್ 2024, 14:36 IST
Last Updated : 9 ಆಗಸ್ಟ್ 2024, 14:36 IST
ಫಾಲೋ ಮಾಡಿ
Comments

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ಸಿಬಿಐ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸಬೇಕು’ ಎಂದು ಕೋರಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವ ಕುರಿತಾದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಈ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವಂತೆ ಕೋರಿ ಹೈಕೋರ್ಟ್‌ನ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್‌ ಶುಕ್ರವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಸುದೀರ್ಘ ವಾದ ಮಂಡಿಸಿದರು.

‘ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಂಡಿದ್ದಾರೆ. ವಿಶೇಷ ಬಡಾವಣೆ ಎನಿಸಿದ ವಿಜಯನಗರದಲ್ಲಿ ಬದಲಿ ನಿವೇಶನಗಳನ್ನು ತಮ್ಮ ಪತ್ನಿ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದಾರೆ. ಪತಿ ಅಧಿಕಾರದಲ್ಲಿ ಇದ್ದಾಗ ಪತ್ನಿ ಅಕ್ರಮ ಗಳಿಕೆ ಮಾಡಿರುವುದು ಇಲ್ಲಿ ಸ್ಪಷ್ಟವಾಗಿದೆ. ಅಂತೆಯೇ ಈ ನಿವೇಶನಗಳನ್ನು ಬಿಟ್ಟುಕೊಡಬೇಕಾದರೆ ₹65 ಕೋಟಿ ಕೊಡಬೇಕು ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಇದೊಂದು ಹಗರಣ ಎಂಬುದರಲ್ಲಿ ಸಂಶಯವೇ ಇಲ್ಲ. ಹಾಗಾಗಿ, ಇದನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಲು ಆದೇಶಿಸಬೇಕು’ ಎಂದು ಲಕ್ಷ್ಮಿ ಅಯ್ಯಂಗಾರ್‌ ಕೋರಿದರು.

ವಾದ ಆಲಿಸಿದ ನ್ಯಾಯಾಧೀಶರು, ಈ ದೂರನ್ನು ಅಂಗೀಕರಿಸಬೇಕೋ ಬೇಡವೋ ಎಂಬ ಬಗ್ಗೆಗಿನ ಕಾನೂನು ನಿಷ್ಕರ್ಷೆಯ ಆದೇಶವನ್ನು ಇದೇ 13ಕ್ಕೆ ಪ್ರಕಟಿಸುವುದಾಗಿ ತಿಳಿಸಿದರು. ಹೈಕೋರ್ಟ್‌ ವಕೀಲ ವಸಂತ ಕುಮಾರ್ ಅರ್ಜಿದಾರರ ಪರ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT