ಬುಧವಾರ, 25 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ‌ ನೀಡುವ ಅವಶ್ಯಕತೆಯಿಲ್ಲ: ಸಚಿವ ಪರಮೇಶ್ವರ

Published : 25 ಸೆಪ್ಟೆಂಬರ್ 2024, 6:34 IST
Last Updated : 25 ಸೆಪ್ಟೆಂಬರ್ 2024, 6:34 IST
ಫಾಲೋ ಮಾಡಿ
Comments

ಬೆಂಗಳೂರು: 'ಮುಡಾ‌ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನೂ ಇಲ್ಲ. ಮುಂದೆ ಕಾನೂನು ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ' ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಯಾವುದೇ ಕಡತಕ್ಕೆ ಸಹಿ ಹಾಕಿಲ್ಲ. ಅಧಿಕಾರ ದುರ್ಬಳಕೆ ಆಗಿಲ್ಲ ಎಂದು ನ್ಯಾಯಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಅದಕ್ಕೆ ವಿರುದ್ಧವಾದ ತೀರ್ಪು ಬಂದಿದೆ. ತೀರ್ಪನ್ನು ಗೌರವಿಸುತ್ತೇವೆ. ಆದರೆ, ಎಲ್ಲೋ ಒಂದು ಕಡೆ ನಮಗೆ ನ್ಯಾಯ ಸಿಗಲಿಲ್ಲವೇನು ಅನ್ನಿಸುತ್ತಿದೆ. ಮುಂದಿ‌ನ ಕಾನೂನು ಹೋರಾಟದ ಬಗ್ಗೆ ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ' ಎಂದರು.

ಮುಖ್ಯಮಂತ್ರಿಯವರು ರಾಜೀನಾಮೆ ಕೊಡಬೇಕು. ಅಧಿಕಾರ ಬಿಟ್ಟು ಇಳಿಯಬೇಕು ಎನ್ನುವ ಮಾತುಗಳು ವಿಪಕ್ಷದವರಿಂದ ಕೇಳಿಬರುತ್ತಿದೆ. ಇದ್ಯಾವುದು ಕೂಡ ಆಗುವುದಿಲ್ಲ. ಮುಖ್ಯಮಂತ್ರಿಯವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಅನೇಕರು ಸ್ಪಷ್ಟಪಡಿಸಿದ್ದಾರೆ. ನಾಬೂ ಇದೇ ಮಾತನ್ನು ಸ್ಪಷ್ಟಪಡಿಸುತ್ತೇನೆ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ರಾಜೀನಾಮೆ ನೀಡುವ ಪ್ರಮೇಯ ಬರುವುದಿಲ್ಲ ಎಂದು ಪುನರುಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಆಪಾದನೆಗಳು ಬಂದಿಲ್ಲ. ಈಗ ರಾಜಕೀಯ ದುರುದ್ದೇಶದಿಂದ ಆರೋಪಗಳನ್ನು ಮಾಡಿದ್ದಾರೆ. ಎಂಥವರಿಗೂ ಇಂತಹ ಆಪಾದನೆ ಮಾಡಿದ್ದಾರೆ ಎಂದಾದಾಗ ನೋವಾಗುವುದು ಸಹಜ. ಇದಕ್ಕೆ ಹೋರಾಟ ಮಾಡಬೇಕಲ್ಲವೇ. ವಿಪಕ್ಷದವರು ರಾಜಕೀಯ ದುರುದ್ದೇಶದಿಂದ ಮಾಡಿರುವ ಆರೋಪವನ್ನು ಜನಸಮುದಾಯಕ್ಕೆ ತೋರಿಸುತ್ತೇವೆ ಎಂದು ಹೇಳಿದರು‌.

ಹೈಕೋರ್ಟ್‌ನಲ್ಲಿ ವಕೀಲರು ವಾದ ಮಾಡುವ ಸಂದರ್ಭದಲ್ಲಿ, 'ಮುಖ್ಯಮಂತ್ರಿಯವರ ಪಾತ್ರ ಏನಿದೆ ಎಂಬುದನ್ನು ಹೇಳಿ. ಈ ಬಗ್ಗೆ ಯಾರು ಹೇಳುತ್ತಿಲ್ಲವಲ್ಲ' ಎಂದು ಜಡ್ಜ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿಯವರ ಪಾತ್ರ ಏನು ಎಂಬುದು ಜಡ್ಜ್‌ಮೆಂಟ್‌ನಲ್ಲಿ ಎಲ್ಲಿಯೂ ಕಾಣಿಸಿಲ್ಲ. ದ್ವಿಸದಸ್ಯ ಪೀಠ ಅಥವಾ ಸುಪ್ರೀಂಕೋರ್ಟ್‌ಗೆ ಹೋಗುವ ಬಗ್ಗೆ ಮುಖ್ಯಮಂತ್ರಿಯವರು ಮತ್ತು ಅವರ ಕಾನೂನು ಸಲಹೆಗಾರರು ತೀರ್ಮಾನ ಮಾಡುತ್ತಾರೆ. ನಮಗೆ ನ್ಯಾಯ ಸಿಕ್ಕಿಲ್ಲ.‌ ಸಮಾದಾನ ತಂದಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನ್ಯಾಯಯುತವಾದ ತೀರ್ಮಾನ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟರು.

ಪಕ್ಷದ ಅಧ್ಯಕ್ಷರು ಮತ್ತು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಮುಂದುವರಿಯುತ್ತೇವೆ. ಬಿಜೆಪಿಯವರ ಉದ್ದೇಶವೇ ಮುಖ್ಯಮಂತ್ರಿಯವರ ರಾಜೀನಾಮೆ ತೆಗೆದುಕೊಳ್ಳಬೇಕು ಎಂಬುದು. ಅವರು ಹೋರಾಟ ಮಾಡುವುದರಲ್ಲಿ ಆಶ್ಚರ್ಯ ಪಡುವುದು ಏನೂ ಇಲ್ಲ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡಬೇಡಿ ಎಂದು ಮುಖ್ಯಮಂತ್ರಿಯವರಿಗೆ ಒತ್ತಾಯಿಸಿದ್ದೇವೆ. ಅವರು ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯವರ ಮೇಲೆ ಪಕ್ಷದೊಳಗೆ ಯಾವುದೇ ರೀತಿಯ ಒತ್ತಡವಿಲ್ಲ. ಬಿಜೆಪಿಯವರು ಪದೇಪದೆ ರಾಜೀನಾಮೆ ಕೊಡಬೇಕು ಎಂದು ಹೇಳುತ್ತಿರುವುದರಿಂದ, ರಾಜೀನಾಮೆ‌ ನೀಡುವುದಿಲ್ಲ‌ ಎಂದು ಮುಖ್ಯಮಂತ್ರಿಯವರು ಪುನರುಚ್ಚರಿಸಿದ್ದಾರೆ‌. ಪಕ್ಷದೊಳಗೆ ಒತ್ತಡವಿರುವ ರೀತಿಯ ವ್ಯತ್ಯಾಸಗಳಾಗಲಿ, ಭಾವನೆಗಳಾಗಲಿ ಇಲ್ಲ. ಹೈಕಮಾಂಡ್ ನಿಮ್ಮ ಜೊತೆಗಿದೆ ಎಂದು ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಹೇಳಿದ್ದಾರೆ‌ ಎಂದು ಸ್ಪಷ್ಟಪಡಿಸಿದರು.

ಹೈಕೋರ್ಟ್‌ನಿಂದ ರಾಜ್ಯಪಾಲರಿಗೆ ಬಲ ಬಂದಿರಬಹುದು. ಅದನ್ನು ಎಲ್ಲರಿಗೂ ಅನ್ವಯಿಸಬೇಕು. ಎಚ್‌.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಅವರಿಗೂ ಅನ್ವಯಿಸಬೇಕಲ್ಲವೇ? ಬಲ ಬಂದಿದೆ ಅಂತ ಹೇಳಿ ಒಬ್ಬರಿಗೆ, ಒಂದು ವರ್ಗಕ್ಕೆ ಸೀಮಿತ ಮಾಡುವುದು ಸರಿ ಕಾಣಿಸುವುದಿಲ್ಲ. ಅದು ನ್ಯಾಯ ಅಂತಲೂ ಅನ್ನಿಸುವುದಿಲ್ಲ ಎಂದು ಹೇಳಿದರು.

ರಾಜ್ಯಪಾಲರು ಕಡತಗಳನ್ನು ಲೋಕಾಯುಕ್ತಕ್ಕೆ ವಾಪಸ್ ಕಳಹಿಸಿರಬಹುದು. ಲೋಕಾಯುಕ್ತದವರು ಸ್ಪಷ್ಟನೆ ನೀಡಿ, ಆ ಕಡತಗಳನ್ನು ರಾಜ್ಯಪಾಲರಿಗೆ ವಾಪಸ್ ಕಳುಹಿಸಿದ್ದಾರೆ. ರಾಜ್ಯಪಾಲರು ತಮ್ಮ ಬಲವನ್ನು ಈ ಪ್ರಕರಣಗಳಿಗೂ ಉಪಯೋಗಿಸಬೇಕು ಎಂದರು.

ಸಿದ್ದರಾಮಯ್ಯನವರು ವೀಕ್ ಆಗಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಿಮಗೆ ಹಾಗೆ ಅನ್ನಿಸುತ್ತಾ? ನಮಗೆ ಏನು ಆ ರೀತಿ ಅನ್ನಿಸುವುದಿಲ್ಲ. ಸಿದ್ದರಾಮಯ್ಯನವರು ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದರು.

ಬೆಂಗಳೂರನ್ನೆ ತಲ್ಲಣಗೊಳಿಸಿರುವ ವೈಯಾಲಿಕಾವಲ್‌ನಲ್ಲಿ ನಡೆದ ಮಹಿಳೆ‌ ಮಹಾಲಕ್ಷ್ಮೀ ಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಆರೋಪಿ ಒಡಿಶಾದಲ್ಲಿ ಇದ್ದಾನೆ ಎಂದು ಈಗಾಗಲೇ ಗುರುತಿಸಲಾಗಿದೆ. ಸ್ಥಳ ಬದಲಾಯಿಸುತ್ತಿದ್ದು ತೀವ್ರ ಶೋಧ ನಡೆದಿದೆ. ಈಗಾಗಲೇ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ಸಾಕ್ಷ್ಯ ಮತ್ತು ಮಾಹಿತಿ ಆಧಾರದ ಮೇಲೆ ಒಡಿಶಾದಲ್ಲಿ ತಲೆಮರೆಸಿಕೊಂಡಿರುವ ವ್ಯಕ್ತಿಯ ಮೇಲೆ ಸಂಶಯವಿದೆ ಎಂದು ಮಾಹಿತಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT