ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಡಿ ಗ್ರೂಪ್ ನೌಕರರ ಬಡ್ತಿಗೆ ಸಂಬಂಧಿಸಿದ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸುವುದನ್ನು ವಿಳಂಬ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಪಿ.ಸುದರ್ಶನ್ ಸೇರಿದಂತೆ ಪಾಲಿಕೆಯ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕರ ಮತ್ತು ಕಂದಾಯ ನಿರೀಕ್ಷಕರಾದ ಒಟ್ಟು 58 ನೌಕರರು ಸಲ್ಲಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಅಂತೆಯೇ, ‘ಪಾಲಿಕೆಯು ಕಂದಾಯ ನಿರೀಕ್ಷಕರು, ಎಫ್ಡಿಎ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಬಡ್ತಿ ನೀಡಿ ಕೈಗೊಳ್ಳುವ ನಿರ್ಧಾರವು, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಡಲಿದೆ’ ಎಂದು ಸ್ಪಷ್ಟಪಡಿಸಿತು.
ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಬಿಬಿಎಂಪಿ ಮುಖ್ಯ ಆಯುಕ್ತ, ವಿಶೇಷ ಆಯುಕ್ತ (ಆಡಳಿತ) ಉಪ ಆಯುಕ್ತರಿಗೆ (ಆಡಳಿತ) ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.
ಕೋರಿಕೆ ಏನು?: ‘ಅರ್ಹತೆ ಇಲ್ಲದವರು ಮತ್ತು ಸೇವೆ ಕಾಯಂ ಆಗದವರಿಗೆ ಬಡ್ತಿ ನೀಡಲಾಗುತ್ತಿದೆ. ಆದ್ದರಿಂದ, ಜ್ಯೇಷ್ಠತಾ ಪಟ್ಟಿ ಪ್ರಕಟಿಸುವ ನಿಟ್ಟಿನಲ್ಲಿ ಅರ್ಜಿದಾರರು ಸಲ್ಲಿಸಿರುವ ಮನವಿಗಳನ್ನು ಪರಿಗಣಿಸಬೇಕು ಮತ್ತು ಅರ್ಜಿದಾರರಿಗೆ ಬಡ್ತಿ ನೀಡಲು ಅನುಕೂಲವಾಗುವಂತೆ ಕಾಲಮಿತಿಯೊಳಗೆ ಜ್ಯೇಷ್ಠತಾ ಪಟ್ಟಿ ಪ್ರಕಟಿಸುವಂತೆ ಬಿಬಿಎಂಪಿಗೆ ನಿರ್ದೇಶಿಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ‘ಅಂತಿಮ ಜ್ಯೇಷ್ಠತಾ ಪಟ್ಟಿ ಪ್ರಕಟ ಆಗುವ ತನಕ ಬಡ್ತಿ ನೀಡದಂತೆ ಪಾಲಿಕೆಗೆ ನಿರ್ದೇಶಿಸಿಬೇಕು’ ಎಂದು ಮಧ್ಯಂತರ ಮನವಿ ಮಾಡಿದ್ದಾರೆ.