ಬೆಂಗಳೂರು: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಟಿ.ವಿ ಚಾನಲ್ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ನಿರ್ದೇಶನ ತೆರವಿಗೆ ವಿಭಾಗೀಯ ನ್ಯಾಯಪೀಠ ನಿರಾಕರಿಸಿದೆ.
ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶ ಪ್ರಶ್ನಿಸಿ, ‘ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ನಿರ್ದೇಶಕ ಬೆಂಗಳೂರಿನ ದಬ್ಬೇಗಟ್ಟ ಮಧು ಲಕ್ಷ್ಮಣ, ‘ಮೆಸರ್ಸ್ ಮಿಟ್ಕಾನ್ ಇನ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ ನಿರ್ದೇಶಕ ಮುಂಬೈನ ಶ್ರೀಕಾಂತ್ ಮಿಥೇಶ್ ಬಾಂಗ್ಡಿಯಾ ಮತ್ತು ‘ಪವರ್ ಸ್ಮಾರ್ಟ್ ಮೀಡಿಯಾ‘ದ ಬೆಂಗಳೂರಿನ ಹೆಚ್ಚುವರಿ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅಲಿಯಾಸ್ ರಾಕೇಶ್ ಶೆಟ್ಟಿ ಸಲ್ಲಿಸಿದ್ದ ಮೇಲ್ಮನವಿ ಮೇಲಿನ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.
"ಪರವಾನಗಿ ನವೀಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ಮೇಲ್ಮನವಿದಾರರ ಅಹವಾಲನ್ನು ಆಲಿಸಿ ಆರು ವಾರಗಳಲ್ಲಿ ಇತ್ಯರ್ಥಗೊಳಿಸಿಕೊಳ್ಳಬೇಕು" ಎಂದು ನ್ಯಾಯಪೀಠ ಗಡುವು ನೀಡಿದೆ.
ಮೇಲ್ಮನವಿದಾರ ಕಂಪನಿಗಳ ಪರ ಹಿರಿಯ ವಕೀಲರಾದ ಎಸ್.ಎಸ್.ನಾಗಾನಂದ ಹಾಗೂ ರಿಟ್ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದರು.