ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿದ ಸೀರೆ, ಕಳಪೆ ಆಹಾರ ಪ್ರದರ್ಶನ: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ
Published : 19 ಸೆಪ್ಟೆಂಬರ್ 2024, 15:32 IST
Last Updated : 19 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಬೆಂಗಳೂರು: ಎಲ್ಲ ನಿವೃತ್ತರಿಗೆ ಗ್ರಾಚ್ಯುಯಿಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಅಂಗನವಾಡಿಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗಿರುವ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಹಾಗೂ ಹರಿದ ಸೀರೆ (ಸಮವಸ್ತ್ರ) ಪ್ರದರ್ಶಿಸಿದರು. 

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ನ (ಎಐಟಿಯುಸಿ) ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ‘ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗ್ರಾಚ್ಯುಯಿಟಿ ನೀಡಬೇಕೆಂದು 2022ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. 2023ರ ಏಪ್ರಿಲ್‌ 1ಕ್ಕೆ ಅನ್ವಯವಾಗುವಂತೆ ಗ್ರಾಚ್ಯುಯಿಟಿ ನೀಡುವ ಸರ್ಕಾರದ ಆದೇಶವನ್ನು ಹಿಂಪಡೆದು, ಎಲ್ಲ ನಿವೃತ್ತರಿಗೂ ಗ್ರಾಚ್ಯುಯಿಟಿ ನೀಡಬೇಕು’ ಎಂದು ಆಗ್ರಹಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುತ್ತಿರುವ ಪೌಷ್ಟಿಕ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದ್ದು, ಫಲಾನುಭವಿಗಳು ಈ ಆಹಾರ ಸೇವಿಸುತ್ತಿಲ್ಲ. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಕಾರ ಸ್ಥಳೀಯ ಪೌಷ್ಟಿಕ ಆಹಾರ ನೀಡಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗುತ್ತಿದೆ. ಜಿಲ್ಲಾಧಿಕಾರಿ ಉಸ್ತುವಾರಿಯಲ್ಲಿ ಸಮಿತಿ ರಚಿಸಿ, ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಒತ್ತಾಯಿಸಿದರು.

ತಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಸಿದ್ದೇಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ನ (ಎಐಟಿಯುಸಿ) ಅಧ್ಯಕ್ಷ ಬಿ.ಅಮ್ಜದ್‌, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ (ಟಿಯುಸಿಸಿ) ಅಧ್ಯಕ್ಷ ಜಿ.ಆರ್. ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ (ಎಐಯುಟಿಯುಸಿ) ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ, ರಾಜ್ಯ ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ಮಹಾಮಂಡಳಿ ಅಧ್ಯಕ್ಷೆ ಜಿ.ಚಿತ್ರಾದೇವಿ ಪಾಲ್ಗೊಂಡಿದ್ದರು.

ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿದರು.  ಪ್ರಜಾವಾಣಿ ಚಿತ್ರ
ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುತ್ತಿರುವ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿದರು.  ಪ್ರಜಾವಾಣಿ ಚಿತ್ರ

‘ಗೌರವಧನ ಹೆಚ್ಚಿಸದ ಕಾಂಗ್ರೆಸ್ ಸರ್ಕಾರ’ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ತಿಂಗಳಿಗೆ ₹15 ಸಾವಿರ ಹಾಗೂ ಸಹಾಯಕಿಯರ ಗೌರವ ಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿತ್ತು. ಅದನ್ನು ಈಗ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಈಡೇರಿಸಬೇಕು. ನಿವೃತ್ತರಾದ ಎಲ್ಲರಿಗೂ ₹3 ಲಕ್ಷ ಇಡುಗಂಟು ನೀಡಬೇಕು ಎಂದು ಜಯಮ್ಮ ಒತ್ತಾಯಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಆರಂಭಿಸುವ ಪ್ರಕ್ರಿಯೆ ಆರಂಭಿಸಬೇಕು. ಎಲ್ಲ ಬೇಡಿಕೆಗಳನ್ನು ಸರ್ಕಾರ ಎರಡು ತಿಂಗಳ ಒಳಗೆ ಈಡೇರಿಸಬೇಕು. ಇಲ್ಲವಾದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT