ಕಾಶಿ ಯಾತ್ರೆ ಮುಗಿಸಿ ಇಂದುಮತಿ ಜೂನ್ 30 ರಂದು ರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇಂದುಮತಿ ಮತ್ತು ಯೋಗೀಶ್ ದಂಪತಿಯನ್ನು ಜುಲೈ 1 ರಂದು ಕಾರು ಚಾಲಕ ಸಾಗರ್ ಎಂಬಾತ ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣದಿಂದ ಹಳೇಬೀಡಿಗೆ ಕರೆತರುತ್ತಿದ್ದ. ಕಾರು ಹಾಸನದ– ಹಳೆಬೀಡು ರಸ್ತೆಯ ಸೀಗೆಗೇಟ್ ಸಮೀಪದ ಸೇತುವೆಯ ಮೇಲಿನಿಂದ ಉರುಳಿ ಬಿದ್ದಿದೆ.
ಇಂದುಮತಿ ಅವರ ಅಳಿಯ ಡಾ.ರವಿ ಎಚ್.ಎಸ್. ನೀಡಿರುವ ದೂರಿನಂತೆ, ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 281, 106 ಅಡಿ ಸೋಮವಾರ ಬೆಳಿಗ್ಗೆ 9.15ಕ್ಕೆ ಹಾಸನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಾಲನೆ ಮಾಡಿದ ಕಾರು ಚಾಲಕ ಸಾಗರ್ ಮಹಿಳೆಯ ಸಾವಿಗೆ ಕಾರಣನಾಗಿದ್ದಾನೆ ಎಂದು ದೂರಲಾಗಿದೆ.
ಕೇಂದ್ರ ಸರ್ಕಾರ ಐಪಿಸಿ, ಸಿಆರ್ಪಿಸಿ, ಎವಿಡೆನ್ಸ್ ಆ್ಯಕ್ಟ್ ಬದಲು ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷಾ ಸಂಹಿತೆ. ಸಾಕ್ಷ್ಯ ಅಧಿನಿಯಮ ಜಾರಿಗೆ ತಂದಿದ್ದು, ಇದರಡಿ ರಾಜ್ಯದಲ್ಲಿಯೇ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ.